– ಕೆ.ಎಸ್. ನರಸಿಂಹಸ್ವಾಮಿ
ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,
ಬೇವು ಬೆಲ್ಲ ನಮ್ಮವು.
ಹೊಸತು ವರುಷ, ಹೊಸತು ಹರುಷ-
ಹೊಸತು ಬಯಕೆ ನಮ್ಮವು.
ತಳಿರ ತುಂಬಿದಾಸೆಯೆಲ್ಲ,
ಹರಕೆಯೆಲ್ಲ ನಮ್ಮವು.
ಬಂಜೆ ನೆಲಕೆ ನೀರನೂಡಿ
ಹೊಳೆಯ ದಿಕ್ಕು ಬದಲಿಸಿ
ಕಾಡ ಕಡಿದು ದಾರಿಮಾಡಿ
ಬೆಟ್ಟ ಸಾಲ ಕದಲಿಸಿ.
ಹಿಮಾಚಲದ ನೆತ್ತಿಯಲಿ
ಧ್ವಜವನ್ನಿಟ್ಟು ಬಂದೆವು;
ಧ್ರುವಗಳಲ್ಲಿ ಹೆಜ್ಜೆಯೂರಿ
ಹೊಸನೆಲೆಗಳ ಕಂಡೆವು.
ಬಾನಸೆರೆಯ ಕಲ್ಪಲತೆಗೆ
ನಮ್ಮ ಕಿಡಿಯ ಮುತ್ತಿಗೆ.
ಮುಗಿಯಬಹುದು ನಾಳೆಯೊಳಗೆ
ದೇವತೆಗಳ ಗುತ್ತಿಗೆ!
ಹುಟ್ಟು ಬೆಂಕಿ ನಮ್ಮ ತಾಯಿ;
ಉಟ್ಟ ಸೀರೆ ಸಾಗರ.
ಅವಳ ಮುಗಿಲ ತುರುಬಿನಲ್ಲಿ
ಹೆಡೆಯ ತೆರೆದ ನಾಗರ.
ಅವಳ ಪ್ರೀತಿ ನಮಗೆ ದೀಪ;
ಅವಳ ಕಣ್ಣು ಕಾವಲು.
ಬಿಸಿಲ ತಾಪ, ಮಳೆಯ ಕೋಪ-
ಸಂತೋಷವೆ ಆಗಲೂ.
ಹೆಜ್ಜೆಗೊಂದು ಹೊಸ ಯುಗಾದಿ-
ಚೆಲುವು ನಮ್ಮ ಜೀವನ!
ನಮ್ಮ ಹಾದಿಯೋ ಅನಾದಿ
ಪಯಣವೆಲ್ಲ ಪಾವನ.
Sogasada kavite
mavu navu, bevu navu tumba sogasad kaviteyagide.
KANNADA NAADA HABBAKKE VISHWADA ELLA KANNADIGARIGE HAARDIKA SHUBHAASHAYAGALU.KANNADAVE SATYA KANNADAVE NITYA
Hosa varushad jeevanakke sukha-dukhagalannu samanavagi sweekarisi jeevanand payanvannu sagisalu e kavide darideepavagide. Kavan bared kavige naman…..
ನರಸಿಂಗರ ಮನವ ಮಿಡಿಯುತ್ತಿದೆ ಮಾವು ಮಾವು
This poem has made the poet immortal!!