ದಿನಕ್ಕೊಂದು ಕಥೆ

- ಡಾ| ಅನುಪಮ ನಿರಂಜನ

ಮೂರ್ಖ ಮೊಸಳೆ

ಒಂದು ನದಿಯಲ್ಲಿ ಒಂದು ಮೊಸಳೆಯಿತ್ತು. ಅದು ಮುದಿಯಾಗಿತ್ತು. ಪ್ರಾಣಿಗಳನ್ನು ಬೇಟೆ ಆಡಿ ತಿನ್ನಲು ಸಾಧ್ಯವಾಗುತ್ತಿರಲಿಲ್ಲ. ಆದುದರಿಂದ ಅದು ನರಿಯನ್ನು ಕರೆದು, ``ನರಿರಾಯ, ನೀನು ಇನ್ನು ಮೇಲೆ ನನ್ನ ಮಂತ್ರಿ. ನಿನ್ನ ಕೆಲಸವೇನೆಂದರೆ ನಂಗೆ ದಿನಕ್ಕೊಂದು ಪ್ರಾಣೀನ ಆಹಾರವಾಗಿ ತಂದುಕೊಡೋದು” ಎಂದಿತು. ಅಳಿದುಳಿದ ಮಾಂಸ ತನಗೆ ಸಿಗುವುದೆಂಬ ಆಶೆಯಿಂದ ನರಿ ``ಆಗಲಿ” ಎಂದಿತು.
ನದೀತೀರದ ಮರಳಿನ ಮೇಲೆ ಮೊಸಳೆ ಬಿಸಲಿಗೆ ಮೈ ಕಾಯಿಸಿಕೊಳ್ಳುತ್ತಾ ಮಲಗಿತ್ತು. ನರಿ ಪ್ರಾಣಿಯನ್ನು ಹುಡುಕಿ ಕೊಂಡು ಕಾಡಿನೊಳಗೆ ಹೋಯಿತು. ಅದರ ಎದುರಿಗೆ ಮೊಲವೊಂದು ಸಿಕ್ಕಿದಾಗ ನರಿ, ``ಮೊಲರಾಯ, ಮೊಸಳೆ ನಿನ್ನ ಹತ್ತಿರ ಮಾತಾಡಬೇಕಂತೆ. ಬಾ” ಎಂದು ಕರೆಯಿತು. ಇದರಲ್ಲೇನೋ ಮೋಸವಿದೆಯೆಂದು ತಿಳಿದ ಮೊಲ, ``ಮೊಸಳೇನ ಕಂಡ್ರೆ ನಂಗೆ ಹೆದರಿಕೆಯಪ್ಪ! ನಾನು ಬರೋಲ್ಲ” ಎಂದು ದೂರದಿಂದಲೇ ಹೇಳಿತು.
ಮರುದಿನ ನರಿ ಒಂದು ಉಪಾಯ ಯೋಚಿಸಿತು. ಮೊಸಳೆಯನ್ನು ಮರವೊಂದರ ಕೆಳಗೆ ಮಲಗಿಸಿ ಅದರ ಮೇಲೆ ಕಾಡಿನ ಹೂಗಳನ್ನು ಹಾಕಿ. ``ಮೊಲ ಬಂದಾಗ ನೀನು ಅಲುಗಾಡದೆ ಸತ್ತಹಾಗೆ ಮಲಕ್ಕೊಂಡಿರು. ಅದು ಹತ್ತಿರ ಬಂದಾಗ ಗಬ್ಬಕ್ಕನೆ ತಿನ್ನು” ಎಂದು ಬೋಧಿಸಿತು. ಮೊಸಳೆ ಸಂತೋಷದಿಂದ ಒಪ್ಪಿಕೊಂಡಿತು.
ನರಿ ಮೊಲದ ಬಳಿಗೆ ಹೋಗಿ, ``ಮೊಲರಾಯಾ, ನನ್ನ ರಾಜ ಮೊಸಳೆ ಸತ್ತುಹೋಯ್ತು. ಈಗಲಾದರೂ ಅದನ್ನು ಬಂದು ನೋಡು” ಎಂದು ಕಣ್ಣೀರು ಸುರಿಸುತ್ತಾ ಹೇಳಿತು. ಮೊಲ ಅದನ್ನು ನಿಜವೆಂದು ನಂಬಿ, ನರಿಯ ಜೊತೆಗೆ ತುಸು ದೂರಬಂದು ದೂರದಿಂದಲೇ ಮರದ ಕೆಳಗೆ ಮಲಗಿದ್ದ ಮೊಸಳೆಯನ್ನು ದಿಟ್ಟಿಸಿತು. ಅನಂತರ ಕೇಳಿತು: ``ನರಿರಾಯಾ, ನೀನು ಹೇಳೋದೆಲ್ಲ ಸರಿಯೇ! ಆದ್ರೆ ನಮ್ಮ ಪೂರ್ವಿಕರು ಹೇಳುತ್ತಿದ್ದರು, ಸತ್ತ ಮೊಸಳೆಗಳು ಬಾಲ ಅಲ್ಲಾಡಿಸ್ತಾ ಇರುತ್ತವೆ ಅಂತ. ಈ ಮೊಸಳೆ ಸುಮ್ಮನೆ ಮಲಕ್ಕೊಂಡಿದೆಯಲ್ಲಾ!”. ಮೊಲ ಅಷ್ಟು ಹೇಳಿದ್ದೆ ತಡ, ಮೊಸಳೆ ತನ್ನ ಬಾಲವನ್ನು ಎತ್ತಿ ಆಡಿಸಲಾರಂಭಿಸಿತು. ನಿಜಸ್ಥಿತಿ ಗೊತ್ತಾದ ಮೊಲ ಕಾಡಿನೊಳಗೆ ಓಟಕಿತ್ತಿತು.
``ನಿನ್ನ ಮೂರ್ಖತನದಿಂದ ನನ್ನ ಶ್ರಮವೆಲ್ಲಾ ನೀರು ಪಾಲಾಯ್ತು” ಎಂದು ನರಿ ಮೊಸಳೆಯನ್ನು ಶಪಿಸಿತು.

ಮಗುವಾದ ಬೀರಬಲ

ಬೀರಬಲನು ದಿಲ್ಲಿಯ ಚಕ್ರವರ್ತಿ ಅಕ್ಬರನ ಮಂತ್ರಿ.
ಒಂದು ದಿನ ಅಕ್ಬರನು ಆಸ್ಥಾನಕ್ಕೆ ಬಂದಾಗ ಬೀರಬಲ ಇನ್ನೂ ಬಂದಿರಲಿಲ್ಲ. ``ಬೀರಬಲನನ್ನು ಕರೆದು ತನ್ನಿ” ಎಂದು ಅಕ್ಬರ ಭಟರಿಗೆ ಆಜ್ಞಾಪಿಸಿದ.
ಬೀರಬಲನಲ್ಲಿಗೆ ಹೋದ ಭಟರು ಹಿಂತಿರುಗಿ ಬಂದು ``ಬರ್‍ತೀನಿ ಎಂದರು ಮಹಾಪ್ರಭೂ” ಎಂದು ಬಿನ್ನವಿಸಿಕೊಂಡರು.
ಒಂದು ಗಂಟೆ ಕಳೆಯಿತು. ಆದರೂ ಬೀರಬಲ ಬರಲಿಲ್ಲ. ಅಕ್ಬರ ಪುನಃ ಹೇಳಿಕಳುಹಿಸಿದ. ಮತ್ತೆ ಒಂದು ಗಂಟೆ ಕಳೆಯಿತು. ಬೀರಬಲನ ಸುಳಿವೇ ಇಲ್ಲ. ಅಕ್ಬರ ಸಿಟ್ಟಿಗೆದ್ದು ಮತ್ತೆ ಭಟರನ್ನು ಕಳಿಸ ಬೇಕೆಂದಿರುವಾಗ ಬೀರಬಲನ ಆಗಮನ ಆಯಿತು.
“ಯಾಕಿಷ್ಟು ತಡಮಾಡಿದೆ ಬೀರಬಲ?” ಎಂದು ಅಕ್ಬರ ಕೋಪದಿಂದಲೇ ಕೇಳಿದ.
``ನನ್ನ ಮಗು ಅಳ್ತಿತ್ತು, ಅದನ್ನು ಸಮಾಧಾನಪಡಿಸಿ ಬರೋಕೆ ಇಷ್ಟು ಹೊತ್ತಾಯ್ತು ಪ್ರಭು” ಎಂದು ನುಡಿದ ಬೀರಬಲ.
``ಮಗುವನ್ನು ಸಮಾಧಾನಪಡಿಸೋದೊಂದು ದೊಡ್ಡ ಕೆಲಸವೇ?”
``ಹೌದು ಮಹಾ ಪ್ರಭೂ”
``ನಾನಾಗಿದ್ದರೆ ಮಗುವನ್ನು ಒಂದು ಕ್ಷಣದಲ್ಲಿ ಸಮಾಧಾನ ಪಡಿಸ್ತಿದ್ದೆ. ಬೇಕಾದರೆ ತೋರಿಸಲೇನು? ಬೀರಬಲ! ನೀನು ಮಗುವಿನಂತೆ ಅಭಿನಯಿಸು. ನಾನು ತಂದೆಯಂತೆ ನಟಿಸ್ತೇನೆ” ಎಂದ ಅಕ್ಬರ.
ತಕ್ಷಣ ಬೀರಬಲ ಉರುಳಾಡಿ ಅಳತೊಡಗಿದ.
``ಯಾಕೆ ಮಗು ಅಳ್ತಿದ್ದೀ? ನಿನಗೇನು ಬೇಕು?” ಎಂದು ಕೇಳಿದ ಅಕ್ಬರ.
``ನನಗೆ ಕಬ್ಬು ಬೇಕು ಅಪ್ಪ.”
ಅಕ್ಬರ ಕಬ್ಬು ತರಿಸಿದ. ಆದರೆ ಬೀರಬಲನ ಅಳು ನಿಲ್ಲಲಿಲ್ಲ.
``ಕಬ್ಬಿನ ಸಿಪ್ಪೆ ತೆಗೆದುಕೊಡು ಅಪ್ಪ.”
ಭಟರಿಗೆ ಅಜ್ಞೆ ಮಾಡಿ ಕಬ್ಬಿನ ಸಿಪ್ಪೆ ತೆಗೆಸಿದ ಅಕ್ಬರ.
``ಇನ್ನಾದರೂ ಸುಮ್ಮನಿರು ಮಗು” ಎಂದ.
``ಊಹೂ ನನಗೆ ಕಬ್ಬನ್ನು ಹೋಳು ಮಾಡಿಕೊಡು ಅಪ್ಪ.”
``ಆಗಲಿ ಅದಕ್ಕೇನು?”
ಅಕ್ಬರನ ಆಜ್ಞೆಯಂತೆ ಭಟರು ಕಬ್ಬನ್ನು ತುಂಡು ಮಾಡಿ ಕೊಟ್ಟರು. ಬೀರಬಲ ಅದನ್ನು ತಿನ್ನುತ್ತ ಮತ್ತೆ ಅಳತೊಡಗಿದ.
ಅಕ್ಬರನಿಗೆ ಸಿಟ್ಟು ಬಂದು ``ಮತ್ಯಾಕೆ ಅಳ್ತಿಯೋ ಮಗನೇ?” ಎಂದು ಕೂಗಿದ.
``ತುಂಡು ಮಾಡಿದ ಕಬ್ಬುನ್ನು ಮತ್ತೆ ಕೂಡಿಸು ಅಪ್ಪ.”
``ತುಂಡು ಮಾಡಿದ ಮೇಲೆ ಮತ್ತೆ ಒಂದು ಮಾಡೋಕೆ ಸಾಧ್ಯವೇ? ನಿನಗೆ ಬಿದ್ಧಿ ಇಲ್ವೇನು?”
``ನೀನು ಒಂದು ಮಾಡಿದಿದ್ದರೆ ನಾನು ಅಳೋದು ನಿಲ್ಲಿಸೋದಿಲ್ಲ!” ಎಂದು ಬೀರಬಲ.
ಅಕ್ಬರನಿಗೆ ತುಂಬಾ ಕೋಪ ಬಂದು ಬೀರಬಲನ ಕೆನ್ನೆಗೆ ಬಲವಾಗಿ ಹೊಡೆದ. ಬೀರಬಲನ ಅಳು ಮತ್ತೂ ಜಾಸ್ತಿ ಆಯಿತು. ಆಗ ಅಕ್ಬರ: ``ನಿನ್ನ ದಮ್ಮಯ್ಯ! ಅಳೋದು ನಿಲ್ಲಿಸಪ್ಪ. ನಾನು ಸೋತೆ ಅಂತ ಒಪ್ಪಿಕೊಂಡಿದೇನೆ. ಮಕ್ಕಳನ್ನು ಸಮಾಧಾನ ಪಡಿಸೋದು ನಿಜವಾಗಿಯೂ ಕಷ್ಟ ಅಂತ ಇವತ್ತು ನನಗೆ ತಿಳೀತು” ಎಂದು ನುಡಿದ.

(ಮೈಸೂರಿನ ಡಿವಿಕೆ ಮೂರ್ತಿ ಪ್ರಕಾಶನದ ಕೃಪೆಯಿಂದ)